ಬೆಂಗಳೂರು : ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್19ರ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಏಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದಂತ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ.
ಅಲ್ಲದೇ ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕೂಡ, 2020-21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಸುತ್ತೋಲೆ ಹೊರಡಿಸಿದೆ.
ವರದಿ : ವಸಂತ ಬಿ ಈಶ್ವರಗೆರೆ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now