ಬೆಂಗಳೂರು: 'ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಲಸಿಕೆ ನೀಡಲಾಗಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ಮತ್ತು ಬಿಇಒ ಜೊತೆ ವಿಡಿಯೊ ಸಂವಾದ ನಡೆಸಿ ಸಿದ್ಧತೆಯ ಪರಿಶೀಲನೆ ನಡೆಸಿದ ಅವರು, 'ಇದೇ 15 ಮತ್ತು 17ರಂದು ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಅಣಕು ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳು ಅಂತರ ಕಾಪಾಡಿಕೊಳ್ಳುವಂತೆ ನಿಗಾವಹಿಸಬೇಕು' ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಪರೀಕ್ಷಾ ಸಿದ್ಧತೆ, ಸಿಬ್ಬಂದಿ ಲಸಿಕೆ ಪಡೆದಿರುವುದು, ಸ್ಥಳೀಯ ಹಂತದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಗಳ ಮಾಹಿತಿ, ಸ್ವಯಂ ಸೇವಕರ ನೇಮಕ, ಮಾಸ್ಕ್, ಸ್ಯಾನಿಟೈಜರ್ ವ್ಯವಸ್ಥೆ, ಎಸ್ಒಪಿ ಪಾಲನೆ ಕುರಿತು ಎಲ್ಲ 34 ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐಗಳಿಂದ ಸಚಿವರು ಮಾಹಿತಿ ಪಡೆದರು.
ಬಳಿಕ ಮಾತನಾಡಿದ ಅವರು, 'ಶೇ 95ಕ್ಕಿಂತ ಹೆಚ್ಚು ಪರೀಕ್ಷಾ ಸಿಬ್ಬಂದಿ ಈಗಾಗಲೇ ಲಸಿಕೆ ಪಡೆದುಕೊಂಡಿದ್ದಾರೆ. ಉಳಿದವರು ಇನ್ನೆರಡು ದಿನಗಳಲ್ಲಿ ಲಸಿಕೆ ಪಡೆಯಲಿದ್ದಾರೆ' ಎಂದರು.
Disclaimer
This story is auto-aggregated by a computer program and has not been created or edited by Dailyhunt Publisher: Prajavani