ತುಮಕೂರು : ಇನ್ನು ಮುಂದೆ ರಾಜ್ಯದಲ್ಲಿ ಟಿ.ಇ.ಟಿ. ಪರೀಕ್ಷೆ ಗಳನ್ನು 6 ತಿಂಗಳಿಗೊಮ್ಮೆ ನಿಗಧಿತ ದಿನಾಂಕಗಳಂದು ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
BIG BREAKING NEWS : ಅಕ್ಟೋಬರ್.1ರಿಂದ ಉನ್ನತ ಶಿಕ್ಷಣ ತರಗತಿಗಳು ಆರಂಭ - ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
ಶಾಲಾರಂಭದ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿನ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾರಂಭದ ಸಿದ್ಧತೆ ಹಾಗೂ ಕೈಗೊಂಡಿರುವ ಸೂಕ್ತ ಕ್ರಮಗಳ ಬಗ್ಗೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ತಾಂತ್ರಿಕ ಹಾಗೂ ಮತ್ತಿತರ ಕಾರಣಗಳಿಂದ ಮಕ್ಕಳಿಗೆ ಆನ್ಲೈನ್ ಮೂಲಕ ಉತ್ತಮ ಶಿಕ್ಷಣ ನೀಡಲು ಸಾಧ್ಯವಾಗಲಿಲ್ಲ. ಮೊಬೈಲ್ ಮೂಲಕ ನೀಡುವ ಶಿಕ್ಷಣ ಮಕ್ಕಳಲ್ಲಿ ಕಲಿಕಾಸಕ್ತಿ ಕಡಿಮೆ ಆಗುತ್ತಿರುವುದು, ಅಂತರ್ಜಾಲ ಸಮಸ್ಯೆ ಮತ್ತಿತರ ತಾಂತ್ರಿಕ ಸಮಸ್ಯೆಗಳು ಕಂಡುಬಂದಿತ್ತು. ಹಾಗಾಗಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದರು.
ಕೋವಿಡ್ ಸೋಂಕು ಕಡಿಮೆಯಾಗಿರುವುದರಿಂದ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಹಾಗೂ ತಾಂತ್ರಿಕ ಸಲಹೆಗಾರರ ಸಲಹೆ ಮೇರೆಗೆ ಆಫ್ಲೈನ್ ತರಗತಿಯನ್ನು ಪ್ರಾರಂಭಿಸಲು ಮುಖ್ಯಮಂತ್ರಿಗಳು ನಿರ್ಣಯ ಕೈಗೊಂಡಿರುವ ಹಿನ್ನೆಲೆಯಲ್ಲಿ 9, 10, 11, 12ನೇ ತರಗತಿಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ತರಗತಿಗಳನ್ನು ಪ್ರಾರಂಭಿಸಲು ರಾಜ್ಯದ ಎಲ್ಲಾ ಡಿಡಿಪಿಐ ಗಳೊಂದಿಗೆ ಸಭೆ ನಡೆಸಿದ್ದು, ಮಕ್ಕಳು ಶಾಲೆಗೆ ಬರಲು ಸಿದ್ಧರಿದ್ದಾರೆ ಎಂಬ ಅಭಿಪ್ರಾಯವನ್ನು ಸಭೆಯಲ್ಲಿ ವ್ಯಕ್ತಪಡಿಸಿರುವುದರಿಂದ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಾರಂಭವಾಗಲಿರುವ ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ, ಕೋವಿಡ್ ಮಾರ್ಗಸೂಚಿಗಳನ್ನು ಕೈಗೊಂಡಿರುವ ಬಗ್ಗೆ ಪರಿಶೀಲಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಡಿಪಿಐಗಳಿಗೆ ಸೂಚನೆ ನೀಡಲಾಗಿದೆ. ಶಾಲೆಗೆ ಹಾಜರಾಗುವ ಮಕ್ಕಳು ತಮ್ಮ ಪೋಷಕರಿಂದ ಅನುಮತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಕರ್ತವ್ಯಕ್ಕೆ ಹಾಜರಾಗುವ ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು. ಲಸಿಕೆ ಪಡೆಯದವರಿಗೆ ಕರ್ತವ್ಯಕ್ಕೆ ಹಾಜರಾಗಲು ಅವಕಾಶವಿಲ್ಲ. ಲಸಿಕೆ ಪಡೆಯದೆ ಕರ್ತವ್ಯಕ್ಕೆ ಹಾಜರಾಗದಿರುವವರ ರಜೆಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸಲಾಗುವುದು ಎಂದು ಹೇಳಿದರು.
ಕೋವಿಡ್ ಲಸಿಕೆ ಪಡೆಯಲು ಶಿಕ್ಷಕರಿಗಾಗಿ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿಯನ್ವಯ ಶೇಕಡಾ 95ರಷ್ಟಕ್ಕಿಂತ ಹೆಚ್ಚಿನ ಶಿಕ್ಷಕರು ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆಯದ ಶಿಕ್ಷಕರು ತಪ್ಪದೇ ಲಸಿಕೆಯನ್ನು ಪಡೆಯಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದು ಕಡ್ಡಾಯವಿಲ್ಲ. ಶಾಲೆಗೆ ಹಾಜರಾಗದಿರುವವರಿಗೆ ಆನ್ಲೈನ್ ತರಗತಿಗಳನ್ನು ಸಹ ಮುಂದುವರೆಸಲಾಗುವುದು ಎಂದ ಅವರು, ಸಂಭಾವ್ಯ ಕೋವಿಡ್ ಮೂರನೇ ಅಲೆಯು ಮಕ್ಕಳನ್ನು ಹೆಚ್ಚು ಕಾಡುತ್ತದೆ ಎಂಬ ಮಾಹಿತಿ ಇದ್ದರೂ ಶಾಲೆಯನ್ನು ಪ್ರಾರಂಭಿಸುವ ಅಗತ್ಯವೇನಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ಮಕ್ಕಳಿಗೆ ಮೂರನೇ ಅಲೆ ಸೋಂಕು ತಗುಲುವುದಿಲ್ಲ ಎಂದು ಮಕ್ಕಳ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವುದರಿಂದ ಹಾಗೂ ಕಳೆದ ಒಂದು ತಿಂಗಳಿಂದ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದು ಪ್ರಾಣಹಾನಿ ಸಂಭವಿಸಿರುವುದು ವರದಿಯಾಗಿಲ್ಲದ ಕಾರಣ ಶಾಲೆಗಳನ್ನು ಪ್ರಾರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
ದೇಶದಲ್ಲಿ ಕೋವಿಡ್ ಮೂರನೇ ಅಲೆಯು ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳನ್ನು ಹೊರತುಪಡಿಸಿದರೆ ಮತ್ಯಾವುದೇ ರಾಜ್ಯದಲ್ಲಿ ಕಂಡು ಬಂದಿಲ್ಲ. ಕೋವಿಡ್ ಸೋಂಕು ಶೇ.2ಕ್ಕಿಂತ ಕಡಿಮೆ ಪ್ರಮಾಣದಲ್ಲಿರುವ ಜಿಲ್ಲೆಗಳಲ್ಲಿ ಮಾತ್ರ ಶಾಲೆಗಳನ್ನು ಪ್ರಾರಂಭಿಸಲು ಮಾನ್ಯ ಪ್ರಧಾನ ಮಂತ್ರಿಗಳು ಸೂಚಿಸಿದ್ದಾರೆ. ಕೋವಿಡ್ ಮೂರನೆ ಅಲೆ ಬಾಧಿತ ಗಡಿ ರಾಜ್ಯಗಳಿಂದ ಸೋಂಕು ಬಂದೇ ಬಿಡುತ್ತದೆ ಎಂಬ ಆತಂಕ ಈಗ ದೂರವಾಗಿದೆ. ಶಾಲೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಮೊದಲನೆಯ ಹಾಗೂ ಎರಡನೆಯ ಅಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಎಷ್ಟಿತ್ತು ಎಂಬ ವರದಿಯ ಮಾಹಿತಿಯನ್ನು ಸಂಗ್ರಹಿಸಲು ಬಿಇಓಗಳಿಗೆ ಸೂಚಿಸಲಾಗಿದೆ. ಮಂಗಳೂರು, ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ 5 ಜಿಲ್ಲೆಗಳಲ್ಲಿ ಶೇಕಡ ಎರಡಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳಿರುವುದರಿಂದ ಈ ಜಿಲ್ಲೆಗಳಲ್ಲಿ ಶಾಲೆಗಳನ್ನು ಪ್ರಾರಂಭಿಸುತ್ತಿಲ್ಲ ಎಂದು ತಿಳಿಸಿದರು.
ಆರು ತಿಂಗಳಿಗೊಮ್ಮೆ ಟಿಇಟಿ
ಇನ್ನು ಮುಂದೆ ರಾಜ್ಯದಲ್ಲಿ ಟಿ.ಇ.ಟಿ. ಪರೀಕ್ಷೆ ಗಳನ್ನು 6 ತಿಂಗಳಿಗೊಮ್ಮೆ ನಿಗಧಿತ ದಿನಾಂಕಗಳಂದು ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುತ್ತದೆ ಎಂದರಲ್ಲದೇ ಶಿಕ್ಷಕರ ವರ್ಗಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು. ಮುಂದಿನ ಮಾಹೆಯ 5 ರಿಂದ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ ಸುಮಾರು 35-40 ಸಾವಿರ ಶಿಕ್ಷಕರನ್ನು ಅವರು ಬಯಸಿದ ಸ್ಥಳಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು..
BIG BREAKING NEWS : ರಾಜ್ಯದ ಜನರಿಗೆ ನೆಮ್ಮದಿಯ ಸುದ್ದಿ : 1,189 ಜನರಿಗೆ ಕೊರೋನಾ, 22 ಸೋಂಕಿತರು ಸಾವು
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ನಂಜಯ್ಯ, ಶಾಲಾ ಮುಖ್ಯೋಪಾಧ್ಯಾಯರು, ಮತ್ತಿತರರು ಹಾಜರಿದ್ದರು.
ನಂತರ ಸರಸ್ವತಿ ಪುರಂನ ವಿದ್ಯನಿಕೇತನ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾರಂಭ ಸಿದ್ಧತೆ ಹಾಗೂ ಕ್ರಮಗಳ ಬಗ್ಗೆ ಪರಿಶೀಲಿಸಿದರಲ್ಲದೆ ಎಂಪ್ರೆಸ್ ಶಾಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಅರ್ಹತಾ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now